Loading Now

ಶಿಕ್ಷಕರು ಅಧ್ಯಯನಶೀಲರಾಗಿ: ಶಾಸಕ



ಕೋಲಾರ: ‘ದೇಶದ ಸರ್ವಾಂಗೀಣ ಪ್ರಗತಿ ಪ್ರಾಥಮಿಕ ಶಿಕ್ಷಕರ ಮೇಲೆ ಕೇಂದ್ರೀಕೃತವಾಗಿದೆ. ಶಿಕ್ಷಣ ನೀಡುವ ಶಿಕ್ಷಕರು ಸದಾ ಅಧ್ಯಯನಶೀಲರಾಗಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.
ಜಿಲ್ಲಾ ಕನ್ನಡ ಸಾಂಸ್ಕೃತಿಕ ಪರಿಷತ್ತು ನಗರದ ಪೇಟೆಚಾಮನಹಳ್ಳಿ ಬಡಾವಣೆ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ, ‘ದೇಶದ ಪ್ರಗತಿಗೆ ಪೂರಕವಾಗುವ ಮೌಲ್ಯ ಮತ್ತು ಗುಣಾತ್ಮಕ ಶಿಕ್ಷಣ ನೀಡುವ ಹೊಣೆಗಾರಿಕೆ ಶಿಕ್ಷಕರದು’ ಎಂದರು. ‘ಶಿಲೆಯನ್ನು ಶಿಲ್ಪವಾಗಿಸುವ ಶಿಕ್ಷಕರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಶಿಕ್ಷಕರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮತ್ತು ಸಮರ್ಪಣಾ ಮನೋಭಾವದಿಂದ ನಿರ್ವಹಿಸಬೇಕು. ಶಾಲೆ ಆವರಣವನ್ನು ಹಸಿರಾಗಿಸಿ ಉತ್ತಮ ಪರಿಸರ ನಿರ್ಮಾಣ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಶಿಕ್ಷಕರು ಶಾಲಾ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು. ಹಳೆ ವಿದ್ಯಾರ್ಥಿಗಳ ನೆರವು ಪಡೆದು ಶಾಲೆ ಅಭಿವೃದ್ಧಿಪಡಿಸಬೇಕು’ ಎಂದು ಕಿವಿಮಾತು ಹೇಳಿದರು.
‘ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಕರಾಗಿ ಸೇವೆ ಸಲ್ಲಿಸಿ ರಾಷ್ಟ್ರಪತಿ ಹುದ್ದೆ ಅಲಂಕರಿಸುವ ಮಟ್ಟಿಗೆ ಬೆಳೆದರು. ಅವರ ಆದರ್ಶ, ದೂರದೃಷ್ಟಿ ಶಿಕ್ಷಕರಲ್ಲಿ ಮೂಡಬೇಕು. ವಿದ್ಯಾರ್ಥಿಗಳನ್ನು ಶಾಲೆಯತ್ತ ಸೆಳೆಯುವ ಶಕ್ತಿ ಪಡೆದುಕೊಳ್ಳಿ’ ಎಂದು ತಿಳಿಸಿದರು.
ರಾಮಸಂದ್ರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೆ.ಶ್ರೀನಿವಾಸ್, ಶಾನುಭೋಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಬಿ.ಜ್ಯೋತಿಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು.

Post Comment

You May Have Missed